ತುಮಕೂರು: ಜಿಲ್ಲೆಯಲ್ಲಿ ಹಳ್ಳಿಗತ್ತ ಕೊರೊನಾ ಸೋಂಕು ಹರಡುತ್ತಿದ್ದು, ಜನರು ತುಂಬಾ ಎಚ್ಚರಿಕೆಯಿಂದ ಇರಬೇಕಾಗಿದೆ.
ಮಾತನಾಡುವಾಗ ಪರಸ್ಪರ ಮಾಸ್ಕ್ ಧರಿಸಬೇಕು ಹಾಗಾ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲೇಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮೀಣ ಜನರಿಗೆ ಜಿ.ಪಂ. ಸಿಇಒ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಮುಖಗವಸು ಧರಿಸುವುದು, ಕೈಗಳನ್ನು ಆಗಾಗ್ಗೆ ಸಾಬೂನಿನಿಂದ ತೊಳೆಯುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ರೋಗದ ನಿಯಂತ್ರಣ ಮಾಡುವಲ್ಲಿ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮನವಿ ಮಾಡಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗವು ಪ್ರಮುಖವಾಗಿ ಪರಸ್ಪರ ಸಂಪರ್ಕ ಹಾಗೂ ವೈಯಕ್ತಿಕ ಶುಚಿತ್ವದ ಕೊರತೆಯಿಂದ ಬಹು ಬೇಗ ಹರಡುತ್ತಿದ್ದು, ರೋಗದ ತಡೆಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ಗ್ರಾಮಾಂತರ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಇರುವುದು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ/ ಸಾಮಾಜಿಕ ಅಂತರ ಕಾಪಾಡಿಕೊಳ್ಳದ ವ್ಯಕ್ತಿಗಳಿಗೆ ಒಂದು ನೂರು ರೂಪಾಯಿಗಳಂತೆ ದಂಡ ವಿಧಿಸಲು ಗ್ರಾಮಪಂಚಾಯತಿ ಗಳಿಗೆ ಸೂಚನೆ ನೀಡಲಾಗಿದೆ. ಮಾಸ್ಕ್ ದಿನಾಚರಣೆ ಮೂಲಕ ಮಾಸ್ಕ್ ಧರಿಸಲು ಅರಿವು ಮೂಡಿಸಲಾಗಿದೆ.
ಸಾರ್ವಜನಿಕರು ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ, ಕೈಗಳನ್ನು ಆಗಾಗ್ಗೆ ಸಾಬೂನಿನಿಂದ ಶುಚಿಗೊಳಿಸುವ, ಅಶುಚಿಯಾದ ಕೈಗಳಿಂದ ಬಾಯಿ, ಮೂಗು ಮತ್ತು ಕಣ್ಣುಗಳನ್ನು ಮುಟ್ಟಿಕೊಳ್ಳದಂತೆ ಜಾಗರೂಕತೆ ವಹಿಸುವುದರಿಂದ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಬಹುದೆಂದು ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಲಹೆ ನೀಡಿದ್ದು, ಸಾರ್ವಜನಿಕರೆಲ್ಲರೂ ಈ ಸಲಹೆಗಳನ್ನು ತಪ್ಪದೇ ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.