Thursday, March 28, 2024
Google search engine
Homeಸಾಹಿತ್ಯ ಸಂವಾದಅಂತರಾಳಥೇಟ್ ನನ್ನಂತೆಯೇ..!l

ಥೇಟ್ ನನ್ನಂತೆಯೇ..!l

ಜಿ.ಎನ್.ಮೋಹನ್


‘ಹೌದೇನೇ ಉಮಾ ಹೌದೇನೇ ಜಗವೆನ್ನುವುದಿದು ನಿಜವೇನೇ ?’ -ಇವು ಜಿ ಎಸ್ ಶಿವರುದ್ರಪ್ಪನವರ ಕವಿತೆಯ ಜನಪ್ರಿಯ ಸಾಲುಗಳು.

ಯಾಕೋ ಗೊತ್ತಿಲ್ಲ ಆಗೀಗ ಈ ಸಾಲುಗಳು ನನ್ನ ಮನದೊಳಗೆ ಗುಂಯ್ ಗುಡುತ್ತಲೇ ಇರುತ್ತದೆ.

ಹಾಗಿರುವಾಗ ಈ ಸಾಲುಗಳು ನಿಜವೇನೋ ಎನ್ನುವಂತೆ ಉಮಾ ಮುಕುಂದ್ ತಮ್ಮ ಕವಿತೆಗಳೊಂದಿಗೆ ರಂಗ ಪ್ರವೇಶಿಸಿಯೇಬಿಟ್ಟರು.

ಮುಕುಂದ್, ಮುಕುಂದ್ ಮತ್ತು ಮುಕುಂದ್ ಕುಟುಂಬದಲ್ಲಿ ಎ ಎನ್ ಮುಕುಂದ್ ಹಾಗೂ ಪ್ರತೀಕ್ ಮುಕುಂದ್ ಇಬ್ಬರೂ ಕ್ಯಾಮೆರಾ ಕಣ್ಣಿನ ಮೂಲಕ ಜಗತ್ತನ್ನು ಅಳೆದವರು. ಆ ಕಾರಣಕ್ಕಾಗಿಯೇ ಸಾಕಷ್ಟು ಬೆಳಕನ್ನು ಪಡೆದವರು.

ಈ ಇಬ್ಬರೂ ಕ್ಯಾಮೆರಾ ಕಣ್ಣಿನಿಂದ ಜಗತ್ತನ್ನು ನೋಡುತ್ತಿರುವ ವೇಳೆ ಸದ್ದಿಲ್ಲದೇ ಕಾವ್ಯ ಕಣ್ಣಿನ ಮೂಲಕ ಜಗತ್ತನ್ನು ನೋಡಲು ಹೊರಟವರು ಉಮಾ ಮುಕುಂದ್.

ಖ್ಯಾತ ಛಾಯಾಗ್ರಾಹಕರಾದ ಎ ಎನ್ ಮುಕುಂದ್ ಅವರು ತಮ್ಮ ಕೃತಿಯಲ್ಲಿ ಹೇಗೆ ಉಮಾ ತಮ್ಮ ಫೋಟೋ ಯಾನದ ಭಾಗವಾಗಿದ್ದರು ಹಾಗೂ ಅದರ ಯಶಸ್ಸಿನ ಪಾಲುದಾರರು ಎನ್ನುವುದನ್ನು ಹೇಳಿದ್ದಾರೆ.

ಅಷ್ಟು ಮಾತ್ರ ಎಂದು ನಾವೆಲ್ಲರೂ ಅಂದುಕೊಂಡಿರುವಾಗ ಉಮಾ ಕವಿತೆಗಳ ಮೂಲಕ ಮಾತನಾಡಲಾರಂಭಿಸಿದರು. ತಮ್ಮ ಬದುಕಿನ ಐದು ದಶಕದ ನಂತರ. ಆಗಲೇ ಜಿ ಎಸ್ ಎಸ್ ಕವಿತೆಗೆ ಆದ ಆಶ್ಚರ್ಯ ನನಗೂ ಆದದ್ದು.

ಉಮಾ ಮುಕುಂದ್ ಅವರ ಕವಿತೆಗಳು ಫೇಸ್ ಬುಕ್ ನಲ್ಲಿ ತುಂಬು ಸಂಕೋಚದಿಂದ ಇಣುಕಲು ಆರಂಭಿಸಿದಾಗ ನಾನು ‘ಅವಧಿ’ಗಾಗಿ ಅವರ ಒಂದಷ್ಟು ಕವಿತೆಗಳನ್ನು ಓದುವ ಅವಕಾಶ ದೊರೆಯಿತು.

ಅಷ್ಟೇ..! ನಂತರ ಅವರ ಕವಿತೆಗಳ ಗುಂಗಿನಲ್ಲಿ ಸಿಕ್ಕಿಕೊಂಡೆ.

ಯಾಕೆಂದರೆ ಅವರು ‘ಥೇಟ್ ನನ್ನಂತೆಯೇ..’

ಅವರ ಕವಿತೆಗಳು ಸಹಜವಾಗಿ ಸರಾಗವಾಗಿ ಎಲ್ಲರ ಮಧ್ಯೆ ಓಡಾಡುತ್ತದೆ. ಸೊಪ್ಪು ಕೊಳ್ಳುತ್ತದೆ, ಕೆಪುಚಿನೊಗೆ ಆರ್ಡರ್ ಮಾಡುತ್ತದೆ, ಸಾರನ್ನವೇ ಮುಗಿದಿಲ್ಲದಿರುವಾಗ ವಡೆ ಪಾಯಸ ಬರುತ್ತಿರುವುದನ್ನು ಗೊತ್ತು ಮಾಡಿಕೊಳ್ಳುತ್ತದೆ.

ಹತ್ತು ರೂಪಾಯಿಗೆ ಮೂರು ನಿಂಬೆಹಣ್ಣು ಕೊಳ್ಳಲು ಇಡೀ ಬುಟ್ಟಿಯನ್ನೇ ತಲೆಕೆಳಗು ಮಾಡುತ್ತದೆ, ಅಬ್ಬರದ ನಗುವಿನ ಮಧ್ಯೆ ಭಿಕ್ಕುಗಳನ್ನು ಹುಡುಕುತ್ತದೆ, ಸುಬ್ಬಮ್ಮನ ಅಂಗಡಿಯ ಸಾರಿನ ಪುಡಿ, ಡಿಮಾನಿಟೈಸೇಷನ್ ನಂತರದ ಜಿ ಎಸ್ ಟಿ..

…ಹೀಗೆ ಉಮಾ ಮುಕುಂದ್ ಅವರ ಕವಿತೆ ಕಿರೀಟ ಸಿಕ್ಕಿಸಿಕೊಂಡು ಅಂಬಾರಿಯಲ್ಲೇ ಪಯಣ ಮಾಡುವ ಅನಿವಾರ್ಯತೆ ಸೃಷ್ಟಿಸಿಕೊಳ್ಳದೆ.. ಹವಾಯಿ ಚಪ್ಪಲಿಯನ್ನೇ ಮೆಟ್ಟಿ, ಬೇಕೆಂದಕಡೆ ಬಿಂದಾಸಾಗಿ ಸಂಚಾರ ಹೊರಟುಬಿಡುತ್ತದೆ. ಇವರ ಕವಿತೆಗೆ ಕಾಲು ದಾರಿಯೂ ಗೊತ್ತು, ಹೈವೇಯೂ ಗೊತ್ತು,

ಬಿ ವಿ ಕಾರಂತರು ಸಖತ್ ಮೂಡ್ ನಲ್ಲಿರುವಾಗ ಒಮ್ಮೆ ನನ್ನೊಡನೆ ಮಾತನಾಡುತ್ತ ‘An Actor is like a beggar’s Bag’ ಎಂದಿದ್ದರು. ‘ಒಬ್ಬ ಕಲಾವಿದನಾದವನು ಭಿಕ್ಷುಕನ ಜೋಳಿಗೆಯಂತಿರಬೇಕು. ಅದರಲ್ಲಿ ಸಿಕ್ಕ ಸಿಕ್ಕದ್ದೆಲ್ಲಾ ತುಂಬಿರಬೇಕು. ಅವು ಅರ್ಥಪೂರ್ಣವಾಗಿ ಆಚೆ ಬರಬೇಕು’ ಎನ್ನುತ್ತಿದ್ದರು.

ಹಾಗೆ.. ಥೇಟ್ ಹಾಗೆಯೇ ಉಮಾ ಕವಿತೆಗಳು. ಇಲ್ಲಿ ಎಲ್ಲವೂ ಇವೆ. ಕಂಡದ್ದು, ಕೇಳಿದ್ದು, ಸುತ್ತಿದ್ದು, ನಕ್ಕಿದ್ದು, ಹರಟಿದ್ದು.. ಈ ಎಲ್ಲವೂ ನಿಧಾನವಾಗಿ ಐದು ದಶಕದ ಸೋಸುವಿಕೆಗೆ ಒಳಪಟ್ಟು ಕವಿತೆಗಳಾಗಿ ಚಿಮ್ಮಿವೆ.

ಬಿ ಎ ವಿವೇಕ ರೈ ಅವರು ‘ಬಿಚ್ಚಬೇಕಾದ ಕಟ್ಟಡಗಳು, ಆಲಿಸಬೇಕಾದ ದನಿಗಳು’ ಎನ್ನುವ ಅಂಕಣ ಬರಹದಲ್ಲಿ ಮನಸ್ಸುಗಳನ್ನು ಅರಿಯಲು ಬಿಚ್ಚಬೇಕಾದ ಕಟ್ಟಡಗಳೇನು ಎಂದು ವಿವರಿಸಿದ್ದರು.

ಉಮಾ ಇಲ್ಲಿ ತಾವೇ ತಾವಾಗಿ ತಮ್ಮ ಕವಿತೆಗಳ ಮೂಲಕ ಆಲಿಸಬೇಕಾದ ದನಿಗಳನ್ನು ಮುಂದಿಟ್ಟಿದ್ದಾರೆ.

ಕವಿತೆಯೆಂಬ ಕ್ಯಾಮೆರಾದಲ್ಲಿ ಕಾಣುವುದಕ್ಕೂ, ಕ್ಯಾಮೆರಾದಲ್ಲಿ ಕಾಣುವ ಲೋಕಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಕ್ಯಾಮೆರಾ ಕಂಡ ಲೋಕದ ಮೂಲಕ ತಮ್ಮ ಜಗತ್ತು ಕಟ್ಟಿಕೊಂಡ ಉಮಾ ಮುಕುಂದ್ ಕವಿತೆಯೆಂಬ ಕ್ಯಾಮೆರಾ ಮೂಲಕ ಹೊಸದನ್ನೇ ನಮಗೆ ಕಾಣಿಸುತ್ತಿದ್ದಾರೆ.

ಇವರ ಕವಿತೆಗಳು ಕಾಫಿ ಡೇಯ ಕೆಪುಚಿನೊ ಅಲ್ಲ , ನಮ್ಮ ಮನಸ್ಸು ಸದಾ ಹಾತೊರೆಯುವ ಫಿಲ್ಟರ್ ಕಾಫಿ….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?