Thursday, April 18, 2024
Google search engine
Homeನಮ್ಮೂರುನಾಗಲಮಡಿಕೆಯಲ್ಲಿ ಪ್ರತ್ಯಕ್ಷ ಸರ್ಪ ದರ್ಶನ

ನಾಗಲಮಡಿಕೆಯಲ್ಲಿ ಪ್ರತ್ಯಕ್ಷ ಸರ್ಪ ದರ್ಶನ

ಅಂತ್ಯ ಸುಬ್ರಹ್ಮಣ್ಯ ಎಂದೇ ಜನಪ್ರಿಯವಾಗಿರುವ ತುಮಕೂರು ಜಿಲ್ಲೆ, ಪಾವಗಡ ತಾಲ್ಲೂಕಿನ ನಾಗಲಮಡಿಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ನಿತ್ಯ ನೂರಾರು ಭಕ್ತರು ಬರುತ್ತಾರೆ. ಚರ್ಮವ್ಯಾದಿ, ಕಣ್ಣು, ಮೂಗು, ಕಿವಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸುಬ್ರಹ್ಮಣ್ಯನ ಅನುಗ್ರಹವೇ ಪರಿಹಾರ ಎಂಬ ನಂಬಿಕೆ ಅವರದು. ಉತ್ತರ ಪಿನಾಕಿನಿ ನದಿ ತಟದಲ್ಲಿರುವ ದೇಗುಲಕ್ಕೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಸೇರಿದಂತೆ ಇತರೆ ರಾಜ್ಯಗಳ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ.

ನಾಗದೋಷ ನಿವಾರಣೆಗಾಗಿ ಇಲ್ಲಿಗೆ ಬರುವವರೇ ಹೆಚ್ಚು. ದೇಗುಲಕ್ಕೆ 5 ನೂರು ವರ್ಷಗಳ ಇತಿಹಾಸವಿದೆ ಎಂದು ಹಿರಿಯರು ಹೇಳುತ್ತಾರೆ. ಶತಮಾನಗಳ ಹಿಂದೆ ನೊಳಂಬ ಪಲ್ಲವರ ಕಾಲದಲ್ಲಿ ನಾಗಲಮಡಿಕೆ ಗ್ರಾಮ ಪುಟ್ಟ ಅಗ್ರಹಾರವಾಗಿತ್ತು. ಅನ್ನಂಭಟ್ಟ ಎಂಬ ಭಕ್ತ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಅನುಯಾಯಿಯಾಗಿದ್ದರು. ಪ್ರತಿ ವರ್ಷ ಕುಕ್ಕೆಯಲ್ಲಿ ನಡೆಯುವ ರಥೋತ್ಸವಕ್ಕೆ ಅನ್ನಂಭಟ್ಟರು ಅನ್ನಾಹಾರ ಸೇವಿಸದೆ ಕಾಲ್ನಡಿಗೆ ಮೂಲಕ ಹೋಗಿ ಪೂಜೆ ಸಲ್ಲಿಸುತ್ತಿದ್ದರು. ವಯಸ್ಸು ಹೆಚ್ಚಿದಂತೆ ಭಟ್ಟರ ಶಕ್ತಿ ಕುಂದತೊಡಗಿತು. ರಥೋತ್ಸವದ ವೇಳೆಗೆ ಕುಕ್ಕೆ ತಲುಪಲು ಸಾಧ್ಯವಾಗಲಿಲ್ಲ. ಅನ್ನಂಭಟ್ಟರು ರಥೋತ್ಸವಕ್ಕೆ ಬರುವುದಿಲ್ಲ ಎಂದು ನಿರ್ಧರಿಸಿ, ಅಲ್ಲಿನ ಭಕ್ತರು ರಥವನ್ನು ಎಳೆಯಲು ಮುಂದಾದರು. ಆದರೆ ಒಂದಿಂಚೂ ಕದಲಿಸಲು ಸಾಧ್ಯವಾಗಿಲ್ಲ. ಸುಬ್ರಹ್ಮಣ್ಯ ಸ್ವಾಮಿ ಭಕ್ತನೋರ್ವನ ಮೈಮೇಲೆ ಆವಾಹನೆಯಾಗಿ, ನನ್ನ ಭಕ್ತ ದೂರದಲ್ಲಿ ಬರುತ್ತಿದ್ದಾನೆ. ಆತ ಬರುವವರೆಗೆ ಕಾಯಬೇಕು ಎಂದು ಸೂಚಿಸಿದ್ದಾರೆ. ಭಟ್ಟರು ಬಂದು ಪೂಜೆ ನೆರವೇರಿಸಿದ ನಂತರ ರಥ ಕದಲಿದೆ. ನಂತರ ಅನ್ನಂಭಟ್ಟರಿಗೆ ವಯಸ್ಸಾದ ಕಾರಣ ನಾಗಲಮಡಿಕೆಯಲ್ಲಿಯೇ ಪುಜಾ ಕೈಂಕರ್ಯ ಮುಂದೆವರೆಸಿಕೊಂಡು ಹೋಗುವಂತೆ ಆವಾಹನೆಗೊಂಡ ಭಕ್ತನ ಮೂಲಕ ಸೂಚಿಸಲಾಗಿದೆ. ಜೊತೆಗೆ ಕುಕ್ಕೆ ದೇಗುಲದಲ್ಲಿದ್ದ ಒಂದು ಪಂಚ ಲೋಹದ ವಿಗ್ರಹವನ್ನು ಅನ್ನಂಭಟ್ಟರಿಗೆ ಕೊಡಲಾಗಿದೆ. ಇಂದಿಗೂ ಪಂಚ ಲೋಹದ ವಿಗ್ರಹವನ್ನು ಉತ್ಸವ ಮೂರ್ತಿಯಾಗಿ ನಾಗಲಮಡಿಕೆ ದೇಗುಲದಲ್ಲಿ ಆರಾಧಿಸಲಾಗುತ್ತಿದೆ. ಸ್ವಪ್ನದಲ್ಲಿ ಸುಬ್ರಹ್ಮಣ್ಯ ಕೆಲ ದಿನಗಳ ನಂತರ ಅನ್ನಂಭಟ್ಟರ ಕನಸಿನಲ್ಲಿ ಸುಬ್ರಹ್ಮಣ್ಯಸ್ವಾಮಿ ಕಾಣಿಸಿಕೊಂಡು, ಉತ್ತರ ಪಿನಾಕಿನಿ ನದಿಯಲ್ಲಿ ತಾನಿರುವುದಾಗಿ, ತನ್ನನ್ನು ಹುಡುಕಿ ಪ್ರತಿಷ್ಠಾಪನೆ ನಡೆಸಬೇಕು ಎಂದು ತಿಳಿಸಿದ್ದಾರೆ. ಸ್ವಪ್ನ ವೃತ್ತಾಂತವನ್ನು ಗ್ರಾಮಸ್ಥರಿಗೆ ತಿಳಿಸಿದ ಭಟ್ಟರು ಎತ್ತಿನ ಮಡಿಕೆಗಳ ಮೂಲಕ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ನದಿಯ ನಿಗದಿತ ಸ್ಥಳದಲ್ಲಿ ಎತ್ತುಗಳು ಮುಂದೆ ಹೋಗಲು ಸಾಧ್ಯವಾಗದೆ ನಿಂತಿವೆ. ಮಡಿಕೆ ಇದ್ದ ಸ್ಥಳವನ್ನು ಅಗೆದು ನೋಡಿದಾಗ ಏಳು ಹೆಡೆ ಸರ್ಪ, ಸುತ್ತಿಕೊಂಡಿರುವ ನಾಗರ ವಿಗ್ರಹ ಸಿಕ್ಕಿದೆ. ನದಿ ತಟದಲ್ಲಿ ವಿಗ್ರಹ ಸ್ವಪ್ನದಲ್ಲಿ ದೇವರು ನಿರ್ದೇಶನ ನೀಡಿದಂತೆ ನದಿ ತಟದಲ್ಲಿ ವಿಗ್ರಹ ಪ್ರತಿಷ್ಠಾಪಿಸಲಾಗಿದೆ. ಮಡಿಕೆಗೆ ನಾಗರ ವಿಗ್ರಹ ಸಿಕ್ಕಿದ್ದರಿಂದ ನಾಗಲಮಡಿಕೆ ಎಂಬ ಹೆಸರಿನಿಂದ ಗ್ರಾಮವನ್ನು ಕರೆಯಲಾಗುತ್ತದೆ.

ಆಂಧ್ರದ ರೊದ್ದಂ ವ್ಯಾಪಾರಿ ಬಾಲ ಸುಬ್ಬಯ್ಯ ಎಂಬುವರು ದೈವ ಪ್ರೇರಣೆಯಂತೆ ದೇಗುಲ ನಿರ್ಮಿಸಿದ್ದಾರೆ. ಅವರ ವಂಶಸ್ಥರು ಇಂದಿಗೂ ಜಾತ್ರೆಯ ದಿನಗಳಂದು ಪೂಜೆ, ಅನ್ನದಾಸೋಹ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಸಮಸ್ಯೆಗೆ ಪರಿಹಾರ ಕುಕ್ಕೆಯನ್ನು ಆದಿ ಸುಬ್ರಹ್ಮಣ್ಯ ಎಂತಲೂ, ಘಾಟಿಯನ್ನು ಮಧ್ಯ ಸುಬ್ರಹ್ಮಣ್ಯ ಎಂದು, ನಾಗಲಮಡಿಕೆಯನ್ನು ಅಂತ್ಯ ಸುಬ್ರಹ್ಮಣ್ಯ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ನಾಗಲಮಡಿಕೆ ದೇಗುಲದಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಹೋಮ, ಹವನ ಇತ್ಯಾದಿ ವಿಶೇಷ ಪೂಜೆ ನಡೆಸಲಾಗುತ್ತದೆ. ಕಿವಿಯಲ್ಲಿ ಕೀವು ಸೋರುವುದು, ಕಣ್ಣಿನ ಸಮಸ್ಯೆ, ಉಸಿರಾಟ, ಚರ್ಮ ಸಮಸ್ಯೆ, ವಿವಾಹ, ಸಂತಾನ ಭಾಗ್ಯ, ಕೋರ್ಟ್, ಕಚೇರಿ ಇತ್ಯಾದಿ ಸಮಸ್ಯೆಗಳ ಪರಿಹಾರಕ್ಕಾಗಿ ಭಕ್ತರು ದೇವಸ್ಥಾನಕ್ಕೆ ಬರುವುದು ಸಾಮಾನ್ಯ. ಇಲ್ಲಿಗೆ ಬಂದು ಸಮಸ್ಯೆ ಪರಿಹರಿಸಿಕೊಂಡಿರುವುದಾಗಿ ಭಕ್ತರು ತಿಳಿಸುತ್ತಾರೆ.

ತೀಟೆ ನಾಗಪ್ಪ ನಾಗಲಮಡಿಕೆಯಿಂದ ಪೆಂಡ್ಲಿಜೀವಿಗೆ ಹೋಗುವ ಮಾರ್ಗದಲ್ಲಿ ತೀಟೆ ನಾಗಪ್ಪ ದೇಗುಲವಿದೆ. ಉದ್ಭವ ಮೂರ್ತಿ ತೀಟೆ ನಾಗಪ್ಪನಿಗೆ ಪೂಜೆ ಸಲ್ಲಿಸುವುದರಿಂದ ಚರ್ಮ ವ್ಯಾಧಿ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ. ಭಕ್ತರು ವಿಗ್ರಹವನ್ನು ಮಾಡಿ, ಪೂಜೆ ಸಲ್ಲಿಸಲು ಇಲ್ಲಿ ಅವಕಾಶವಿದೆ. ಬ್ರಹ್ಮ ರಥೋತ್ಸವ ವಿಶೇಷ ಪುಷ್ಯ ಮಾಸದ ಷಷ್ಠಿಯಂದು ಬ್ರಹ್ಮ ರಥೋತ್ಸವ ನಡೆಯುತ್ತದೆ. ಸಹಸ್ರಾರು ಭಕ್ತರು ದೇವರ ದರ್ಶನ ಪಡೆದು ರಥೋತ್ಸವದಲ್ಲಿ ಭಾಗವಹಿಸುತ್ತಾರೆ. ದೂರದೂರುಗಳಿಂದ ಎತ್ತಿನ ಬಂಡಿಯಲ್ಲಿ ಬಂದು ನದಿ ತಟದಲ್ಲಿ ಅಡುಗೆ ತಯಾರಿಸಿ ಪೂಜೆ ನಂತರ ಒಂದು ಹೊತ್ತು ಬಿಡುವ ಪದ್ಧತಿ ಭಾಗದ ಜನರಲ್ಲಿದೆ. ಮಾರ್ಗಶಿರ, ಪುಷ್ಯ, ಮಾಘ ಮಾಸಗಳ ಷಷ್ಠಿಯಂದು ಆರಾಧನೆ, ವಿಶೇಷ ಪೂಜಾ ಮಹೋತ್ಸವ ನಡೆಸಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?