ತುಮಕೂರು ಜಿಲ್ಲೆಯಲ್ಲಿ 1989 ರಿಂದ ಮಾದಿಗ ಸಮುದಾಯಕ್ಕೆ ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭೆ ಚುನಾವಣೆಗಳಲ್ಲಿ ಟಿಕೆಟ್ ನೀಡದೆ
ಎಡಗೈ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ.
ಹಾಗಾಗಿ ಈ ಬಾರಿ ವಿಧಾನ ಪರಿಷತ್ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಮಾದಿಗ ಸಮುದಾಯದವರನ್ನು ಆಯ್ಕೆ ಮಾಡುವ ಮೂಲಕ ಈ ಅನ್ಯಾಯ ಸರಿಪಡಿಸಬೇಕು. ಇದಕ್ಕೆ ಗೃಹ ಸಚಿವರಾದ ಪರಮೇಶ್ವರ್ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಸಹೋದರ ನಿಷ್ಠೆ ತೋರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ಆಗ್ರಹಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೆತ್ರಗಳಿದ್ದು 2 ಎಸ್ ಸಿ ಮೀಸಲು ಕ್ಷೇತ್ರಗಳಿವೆ. ಈ ಎರಡು ಮೀಸಲು ಕ್ಷೇತ್ರದಲ್ಲಿ ನ್ಯಾಯಯುತವಾಗಿ ಕಾಂಗ್ರೆಸ್ ಪಕ್ಷ ಜಿಲ್ಲೆಯ ಬಹುಸಂಖ್ಯಾತ 6.5 ಲಕ್ಷವಿರುವ ಮಾದಿಗ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕಿತ್ತು ಆದರೆ ಟಿಕೆಟ್ ನೀಡದಿದ್ದರೂ ಮಾದಿಗ ಸಮುದಾಯ ಸಹೋದರ ನಿಷ್ಠೆ ಹಾಗೂ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಗೃಹ ಸಚಿವ ಪರಮೆಶ್ವರ್ ಮತ್ತು ಸಚಿವ ರಾಜಣ್ಣ ಅವರನ್ನು ಹೆಗಲ ಮೇಲೆ ಒತ್ತು ಗೆಲ್ಲಿಸಿಕೊಂಡು ಬಂದಿದ್ದಾರೆ. ಆದರೆ 1989 ರಿಂದ ಕಾಂಗ್ರೆಸ್ ಪಕ್ಷದಿಂದ ಮಾದಿಗ ಸಮುದಾಯಕ್ಕೆ ಅಧಿಕಾರ ದೊರೆತಿಲ್ಲ. ತುಮಕೂರು ಜಿಲ್ಲೆಯಲ್ಲಿ ತುಮುಲ್ ಅಧ್ಯಕ್ಷ ಸ್ಥಾನ ಸೇರಿದಂತೆ
ತುಮಕೂರು ವಿವಿಯ ಸಿಂಡಿಕೇಟ್ ಸದಸ್ಯ ಸ್ಥಾನವನ್ನು ಮಾದಿಗ ಸಮುದಾಯಕ್ಕೆ ನೀಡಿಲ್ಲ,
ಒಂದು ಅಭಿವೃದ್ಧಿ ನಿಗಮಕ್ಕೂ ನೇಮಕಮಾಡಿಲ್ಲ.
ಕೋಮುವಾದಿ ಶಕ್ತಿಗಳನ್ನು ಮಣಿಸುವ ಅನಿವಾರ್ಯತೆಯಿಂದ ಮಾದಿಗರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುತ್ತಾ ಬಂದಿದ್ದಾರೆ. ಹೀಗಾಗಿ ಈ ಬಾರಿಯಾದರೂ ಎಂಎಲ್ಸಿ ಹಾಗೂ ಟೂಡ ಅಧ್ಯಕ್ಷ ಸ್ಥಾನ ಸೇರಿದಂತೆ ಹಲವು ಅಧಿಕಾರದ ಅವಕಾಶಗಳನ್ನು ಮಾದಿಗ ಸಮುದಾಯಕ್ಕೆ ಕೊಡುವ ಮೂಲಕ ಸಾಮಾಜಿಕ ನ್ಯಾಯದ ಬದ್ದತೆ ತೋರಬೇಕು ಎಂದು ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಸಿದರು.
ರಾಜಕೀಯ ಪ್ರಾತಿನಿಧ್ಯದ ವಿಷಯದಲ್ಲಿ ಮಾದಿಗರನ್ನು ಕಡೆಗಣಿಸಲಾಗಿದೆ. ಮಾದಿಗ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ತನು, ಮನ, ಧನವನ್ನು ಅರ್ಪಿಸಿದ ಮಾದಿಗ ಸಮುದಯವನ್ನು ಅಧಿಕಾರ ಸ್ಥಾನಮಾನದ ವಿಚಾರ ಬಂದಾಗ ಪರಿಗಣಿಸಬೇಕು ಎಂದು ಹೇಳಿದರು.
ಮಾದಿಗ ಸಮುದಾಯವನ್ನು ಅವಕಾಶಗಳಿಂದ ವಂಚಿಸಿ ಅಧಿಕಾರದಿಂದ ದೂರ ಇಟ್ಟಿರುವುದರಿಂದ ಎಡಗೈ ಸಮುದಾಯದ ನಾಯಕತ್ವವೇ ಜಿಲ್ಲೆಯಲ್ಲಿ ಕ್ಷಿಣಿಸುತ್ತಿದೆ. ಹೀಗೆ ಅಲಕ್ಷಿಸಿದರೆ ಮಾದಿಗ ಸಮುದಾಯ ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾದರು ಇದುವರೆಗೆ ತುಮಕೂರು ಜಿಲ್ಲೆಯಲ್ಲಿ ಮಾದಿಗ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಈ ಬಾರಿ ಪರಿಷತ್ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ನ ಅನುಕೂಲ ಸಿಂಧು ರಾಜಕಾರಣ ಖಾತ್ರಿಯಾಗಲಿದೆ ಎಂದರು.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯ ಮಾದಿಗ ಸಮುದಾಯ ಬಹಿರಂಗವಾಗಿಯೇ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿತ್ತು. ಇದರ ಪರಿಣಾಮ ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್
ಅಭೂತಪೂರ್ವ ಗೆಲುವು ಸಾಧಿಸಿತು. ಆದ್ದರಿಂದ ಈ ಬಾರಿ ಮಾದಿಗ ಸಮುದಾಯದ ಋಣ ತೀರಿಸಲು ಕಾಂಗ್ರೆಸ್ ಗೆ ಇದು ಸಕಾಲ ಎಂದು ಕಾಂಗ್ರೆಸ್ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ಸಲಹೆ ನೀಡಿದರು..